ಉಪಯುಕ್ತ ಲೋಕಲ್- ನಿಮ್ಮೂರಿನ ನಿಮ್ಮದೇ ಸುದ್ದಿಗಳ ಲೋಕಲ್ ಜಾಲತಾಣ | ಜಾಹೀರಾತುಗಳಿಗಾಗಿ ಸಂಪರ್ಕಿಸಿ- 7019126946 ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ- ಡಾ.ಸಿ. ಎನ್ ಅಶ್ವತ್ಥನಾರಾಯಣ

ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆ- ಡಾ.ಸಿ. ಎನ್ ಅಶ್ವತ್ಥನಾರಾಯಣ

 


ಬೆಂಗಳೂರು:  ಮೂರು ದಿನಗಳಿಂದ ಧರಣಿ ನಡೆಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಯ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸುವ ಭರವಸೆಯನ್ನು ಸರಕಾರ ನೀಡಿದೆ.


ಸಿಎಂ ಬಸವರಾಜ ಬೊಮ್ಮಾಯಿ ಅವರು ಅನ್ಯಕಾರ್ಯ ನಿಮಿತ್ತ ತೆರಳಬೇಕಾದ ಹಿನ್ನೆಲೆಯಲ್ಲಿ, ಧರಣಿನಿರತ ಸಂಘಟನೆಯ ಪ್ರಮುಖರನ್ನು ಭೇಟಿ ಮಾಡುವಂತೆ ತಮಗೆ ಸೂಚಿಸಿದ ಹಿನ್ನೆಲೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಸರಕಾರದ ಪರವಾಗಿ ಬೇಡಿಕೆ ಗಳನ್ನು ಆಲಿಸಿದರು.


ಈ ವೇಳೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇರುವ ಮಿನಿ ಅಂಗನವಾಡಿಗಳನ್ನು ಮೇಲ್ದರ್ಜೆಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಇದಲ್ಲದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡುವ ವಿವಿಧ ಭತ್ಯೆಗಳನ್ನು ಕಾಲಕ್ಕೆ ತಕ್ಕಂತೆ ಪರಿಷ್ಕರಿಸುವುದನ್ನು ಗಮನಕ್ಕೆ ತೆಗೆದುಕೊಳ್ಳಲಾಗುವುದು. 


ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಬೇಕಾದ ಪರಿಕರಗಳನ್ನು ಪೂರೈಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ನಿಯೋಗಕ್ಕೆ ಮನದಟ್ಟು ಮಾಡಿಕೊಟ್ಟರು.


ರಾಜ್ಯದಲ್ಲಿ 1.36 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಇದ್ದಾರೆ. ಇವರ ಉಳಿದ ಬೇಡಿಕೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಅವರು ಹೇಳಿದರು.


ಈ ಭರವಸೆ ಸಿಕ್ಕಿದ ಹಿನ್ನೆಲೆ ಮುಷ್ಕರ ಕೈಬಿಡುವ ಭರವಸೆಯನ್ನು ಸಂಘಟನೆಯ ಮುಖ್ಯಸ್ಥೆ ಪ್ರೇಮಾ ಅವರು ಸಚಿವರಿಗೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಮಂಜುಳಾ ಉಪಸ್ಥಿತರಿದ್ದರು.


0 Comments

Post a Comment

Post a Comment (0)

Previous Post Next Post